ದೆಹಲಿ: ಭಾರತ 75ನೇ ವರ್ಷದ ಗಣರಾಜ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.
ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತ ಪ್ರಜಾಪ್ರಭುತ್ವದ ತಾಯಿ ಎಂದಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಸ್ಮರಿಸಿದ ರಾಷ್ಟ್ರಪತಿಗಳು, ನಾರಿ ಶಕ್ತಿ ಅಧಿನಿಯಮ್ ಕಾಯ್ದೆ ಬಗ್ಗೆ ಪ್ರಶಂಸಿಸಿದ್ದಾರೆ. ಅಯೋಧ್ಯೆ ರಾಮಮಂದಿರದ ಬಗ್ಗೆಯೂ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

ನಮ್ಮ ಗಣರಾಜ್ಯದ 75 ನೇ ವರ್ಷವು ಅನೇಕ ರೀತಿಯಲ್ಲಿ ದೇಶದ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ಅಂತ ರಾಷ್ಟ್ರಪತಿಗಳು ಹೇಳಿದ್ದಾರೆ. ನಮ್ಮ ದೇಶವು ಸ್ವಾತಂತ್ರ್ಯದ ಶತಮಾನದತ್ತ ಸಾಗುತ್ತಿದೆ. ಇದರೊಂದಿಗೆ ಅಮೃತ ಕಾಲದ ಆರಂಭಿಕ ಹಂತವನ್ನು ಹಾದುಹೋಗುತ್ತಿದೆ. ಇದು ಯುಗ ಬದಲಾವಣೆಯ ಅವಧಿ.
ಗಣರಾಜ್ಯೋತ್ಸವವು ನಮ್ಮ ಮೂಲ ಮೌಲ್ಯಗಳು ಮತ್ತು ತತ್ವಗಳನ್ನು ನೆನಪಿಡುವ ಪ್ರಮುಖ ಸಂದರ್ಭವಾಗಿದೆ. ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದೆ ಅಂತ ದ್ರೌಪದಿ ಮುರ್ಮು ಶ್ಲಾಘಿಸಿದರು.